ಬೆಂಗಳೂರಿನ 4 ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ; ರೆಫರಲ್‌ ಲೆಟರ್‌ಬೇಕಿಲ್ಲ – ಸಚಿವ ಸಂಪುಟ ನಿರ್ಧಾರ

ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ. 4 ಖಾಸಗಿ ಆಸ್ಪತ್ರೆಗಳಲ್ಲಿ ರೆಫೆರಲ್ ಲೆಟರ್‌ ಇಲ್ಲದೇ ನೇರವಾಗಿ ತೆರಳಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಇದು ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ಹಾಗೂ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ಯಾವೆಲ್ಲಾ ಆಸ್ಪತ್ರೆಗಳು? ಏನೆಲ್ಲಾ ದಾಖಲೆ ಬೇಕು ಈ ಬಗ್ಗೆ ವಿವರ ಇಲ್ಲಿದೆ.

ಬೆಂಗಳೂರು: ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಹಾಗೂ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌. ಬೆಂಗಳೂರಿನ 4 ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇನ್ನು ಮುಂದೆ ಈ ಖಾಸಗಿ ಆಸ್ಪತ್ರೆಗೆ ತೆರಳುವ ಮುನ್ನ ಸರ್ಕಾರಿ ಆಸ್ಪತ್ರೆಯಿಂದ ರೆಫರಲ್‌ ಲೆಟರ್‌ ತೆಗೆದುಕೊಂಡು ಹೋಗುವ ಅವಶ್ಯಕತೆ ಇಲ್ಲ. ಸರ್ಕಾರಿ ನೌಕರರು ಆರೋಗ್ಯ ಕಾರ್ಡ್‌ ಮತ್ತು ಬಡವರು ಬಿಪಿಎಲ್ ಕಾರ್ಡ್‌ನೊಂದಿಗೆ ತೆರಳಿ ಉಚಿತ ಚಿಕಿತ್ಸೆ ಪಡೆಯಬಹುದು. ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

4 ಖಾಸಗಿ ಆಸ್ಪತ್ರೆಗಳು ಯಾವುವು?

  • ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ,
  • ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ
  • ಕಿಮ್ಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ

ಅಂಬೇಡ್ಕರ್ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ.

ಯಾವ ಯೋಜನೆಯಡಿ ಚಿಕಿತ್ಸೆ?

ಸರ್ಕಾರವು ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಬಡವರಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ಸೌಲಭ್ಯ ನೀಡುತ್ತಿದೆ. ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆಯಡಿ ಚಿಕಿತ್ಸಾ ಸೌಲಭ್ಯವಿದೆ. ಈ ಎರಡೂ ಯೋಜನೆಯಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲ ಎಂದಾಗ ಶಿಫಾರಸು ಪತ್ರ ಪಡೆದು (ರೆಫರಲ್‌ ಲೆಟರ್‌) ಖಾಸಗಿ ಆಸ್ಪತ್ರೆಗೆ ತೆರಳಬಹುದು. ಆಗ ಚಿಕಿತ್ಸೆ ವೆಚ್ಚವನ್ನು ಆಯುಷ್ಮಾನ್‌ ಯೋಜನೆಯಡಿ ಸರ್ಕಾರವೇ ಬರಿಸುತ್ತದೆ.

ಸದ್ಯ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ಜಯದೇವಾ ಹಾಗೂ ಕಿದ್ವಾಯಿಯಂತಹ ಸರ್ಕಾರಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಅಗತ್ಯ ಹಾಗೂ ವೇಗದ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಕೆಲ ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದೆ.

ಏನೆಲ್ಲಾ ದಾಖಲಾತಿ ಏನು?

ನೇರವಾಗಿ ಆಸ್ಪತ್ರೆಗೆ ತೆರಳುವವರು ಬಿಪಿಎಲ್‌ ಕಾರ್ಡ್‌ ಅಥವಾ ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್‌ ಹೊಂದಿದ್ದರೆ ಸಾಕು. ಅವರಿಗೆ ಉಚಿತವಾಗಿ ಚಿಕಿತ್ಸೆ ಸಿಗಲಿದೆ.

ಆರೋಗ್ಯ ಇಲಾಖೆಗೆ ಸಂಬಂಧಿಸಿದ ಮಹತ್ವದ ಇತರೆ ನಿರ್ಧಾರಗಳು ಏನು?

  • ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ ಲಸಿಕೆ ನೀಡಲು 15 ಕೋಟಿ ರೂ. ಮಂಜೂರು ಮಾಡಲಾಗಿದೆ.
  • ಬಳ್ಳಾರಿ ವೈದ್ಯಕೀಯ ಕಾಲೇಜಿನಲ್ಲಿ ಸ್ಕಿಲ್ ಲ್ಯಾಬ್ ಸಿಮ್ಯುಲೇಶನ್ ಸೆಂಟರ್ ಸ್ಥಾಪನೆಗೆ 41 ಕೋಟಿ ರೂ. ಮತ್ತು
  • ಜಿಲ್ಲಾ/ತಾಲೂಕು ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 71 ಕೋಟಿ ರೂ. ಅನುಮೋದನೆ ನೀಡಲಾಗಿದೆ.

 

Be the first to comment

Leave a Reply

Your email address will not be published. Required fields are marked *

ad image